ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕನ್ನಡ: ಭಾವುಕತೆ ಸಾಕು ಆಧುನಿಕ ಚಿಂತನೆ ಬೇಕು

ಕರ್ನಾಟಕ ರಾಜ್ಯೋತ್ಸವದ ಸಂದರ್ಭ ಕನ್ನಡದ ಇಂದು ಮತ್ತು ನಾಳೆಗಳನ್ನು ಅವಲೋಕಿಸುವ ದೃಷ್ಟಿಯಿಂದ ಮಹತ್ವವಾದುದು. ಆದರೆ, ಕನ್ನಡದ ಕುರಿತ ನಮ್ಮ ಬಹುತೇಕ ಚಿಂತನೆಗಳು ಭಾವನಾತ್ಮಕ ನೆಲೆಯಲ್ಲಿಯಷ್ಟೇ ಉಸಿರಾಡುತ್ತಿರುತ್ತವೆ. ಆಧುನಿಕ ಸಂದರ್ಭಕ್ಕೆ ತಕ್ಕಂತೆ ಕನ್ನಡವನ್ನು ಸಜ್ಜುಗೊಳಿಸುವ ಕೆಲಸಗಳೇನಾದರೂ ನಡೆದಿವೆಯೇ ಎಂದು ನೋಡಿದರೆ ಆಶಾದಾಯಕ ಸಂಗತಿಗಳೇನೂ ಕಾಣಿಸುವುದಿಲ್ಲ.
ಕಳೆದ ರಾಜ್ಯೋತ್ಸವದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಬದಲಾಗುತ್ತಿರುವ ಕಾಲಮಾನ ಮತ್ತು ಕನ್ನಡಿಗರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಜನಪರವಾದ ಭಾಷಾನೀತಿಯೊಂದು ರೂಪುಗೊಳ್ಳಬೇಕಾದ ಅಗತ್ಯವಿದೆ’ ಎಂದು ಅಭಿ‍ಪ್ರಾಯಪಟ್ಟಿದ್ದರು. ಇಷ್ಟಕ್ಕೂ ಜನಪರವಾದ ಭಾಷಾನೀತಿ ಎಂದರೇನು? ಅದು ಆಯಾ ನೆಲದ ಭಾಷಿಕರ ಪ್ರಾಥಮಿಕ ಅಗತ್ಯಗಳನ್ನು ಪೂರೈಸುವ ಹಾಗೂ ಒಟ್ಟಾರೆ ನಾಡುನುಡಿಯ ಬೆಳವಣಿಗೆಗೆ ಪೂರಕವಾದ ಒಂದು ನೀತಿ. ಈ ಹಿನ್ನೆಲೆಯಲ್ಲಿಯೇ ಕನ್ನಡ ಶಾಲೆಗಳ ಸ್ಥಿತಿಗತಿಯನ್ನೂ, ಆಧುನಿಕ ಸಂದರ್ಭಕ್ಕೆ ಕನ್ನಡವನ್ನು ಒಗ್ಗಿಸುವ ನಿಟ್ಟಿನಲ್ಲಿ ನಡೆದಿರಬಹುದಾದ ಪ್ರಯತ್ನಗಳನ್ನೂ ಪರಿಶೀಲಿಸಬೇಕು.
ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ಸಂಬಂಧಿಸಿದಂತೆ ಸರ್ಕಾರ ದಿಟ್ಟ ನಿರ್ಧಾರವೊಂದನ್ನು ಕೈಗೊಳ್ಳಲು ಪ್ರಯತ್ನಿಸಿಯೇ ಇಲ್ಲ. ಕೆಲವು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ತರಗತಿಗಳನ್ನು ಆರಂಭಿಸುವ ಚಿಂತನೆಯನ್ನು ತಮ್ಮ ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿದ್ದರು. ಆದರೆ, ಇದರ ಸಾಧಕಬಾಧಕಗಳ ಬಗ್ಗೆ ಸರ್ಕಾರದ ಬಳಿ ನಿರ್ದಿಷ್ಟ ಅಂಕಿಅಂಶಗಳೇನೂ ಇದ್ದಂತಿಲ್ಲ. ಪಳೆಯುಳಿಕೆ ರೂಪದಲ್ಲಿಯೇ ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡು, ಅಲ್ಲಿ ಇಂಗ್ಲಿಷ್‌ ಪ್ರದರ್ಶನಗೊಂಬೆಯನ್ನು ತೋರುವುದರಿಂದ ಯಾವ ಉಪಯೋಗವೂ ಇಲ್ಲ. ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಡ್ಡಾಯವಾಗಿ ಕಲಿಸಬೇಕೆನ್ನುವ ಸರ್ಕಾರದ ಆದೇಶ ಕೂಡ ಈವರೆಗೆ ಪೂರ್ಣರೂಪದಲ್ಲಿ ಈಡೇರಿಲ್ಲ ಎನ್ನುವುದು ಕೂಡ ಆಡಳಿತಯಂತ್ರದ ಇಚ್ಛಾಶಕ್ತಿಯ ಕೊರತೆಯನ್ನೇ ಸೂಚಿಸುವಂತಿದೆ.
ಕನ್ನಡವನ್ನು ಜಾಗತಿಕ ಮಟ್ಟದಲ್ಲಿ ಯಾವೆಲ್ಲ ರೂಪದಲ್ಲಿ ಬಿಂಬಿಸಬೇಕು ಎನ್ನುವ ನಿಟ್ಟಿನಲ್ಲಿ ಕ್ರಿಯಾಯೋಜನೆಯೊಂದನ್ನು ಹೊಂದುವುದು ಇಂದಿನ ತುರ್ತು. ವಿಶ್ವದ ಅನೇಕ ಭಾಗಗಳಲ್ಲಿ ಕನ್ನಡದ ಕುರಿತ ಅರಿವಿರಲಿ, ಕನ್ನಡದ ಹೆಸರೇ ತಿಳಿದಿಲ್ಲ. ಇಂಥ ಸಂದರ್ಭಗಳಲ್ಲಿ ವಿಶ್ವದ ಪ್ರತಿಷ್ಠಿತ ಯೂನಿವರ್ಸಿಟಿಗಳಲ್ಲಿ ಕನ್ನಡದ ಕಲಿಕೆ ಹಾಗೂ ಸಂಶೋಧನೆಗೆ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಬೇಕಾಗಿದೆ. ಕನ್ನಡ ಕಟ್ಟುವ ನಿಟ್ಟಿನಲ್ಲಿ ಆಗಬೇಕಾದ ಮತ್ತೊಂದು ಮುಖ್ಯ ಕೆಲಸ, ಅಭಿಜಾತ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿ ವಿಶ್ವದೆಲ್ಲೆಡೆ ವಿತರಿಸುವುದು.
ಇವುಗಳ ಜೊತೆಗೆ ಕನ್ನಡೇತರರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ ವೈಜ್ಞಾನಿಕ ನೆಲೆಗಟ್ಟಿನ ಪಠ್ಯವೊಂದನ್ನು ರೂಪಿಸಬೇಕಾಗಿದೆ. ‘ಎಷ್ಟೆಲ್ಲ ಮಾತು, ಕೋಟಿಗಟ್ಟಲೆ ಹಣದ ಖರ್ಚಿನ ನಂತರವೂ ಕನ್ನಡೇತರರಿಗೆ ಕನ್ನಡ ಬೋಧಿಸುವ ಒಳ್ಳೆಯ ಪಠ್ಯವನ್ನು ರೂಪಿಸುವುದು ಸಾಧ್ಯವಾಗಿಲ್ಲ. ಆಧುನಿಕ ರೀತಿಯಲ್ಲಿ, ಆಡುಕನ್ನಡವನ್ನೂ ಶಿಷ್ಟ ಕನ್ನಡವನ್ನೂ ವ್ಯಾವಹಾರಿಕವಾಗಿ ಪರಿಚಯಿಸುವ ಪಠ್ಯ ಸಿದ್ಧಪಡಿಸಬೇಕಿದೆ’ ಎನ್ನುವ ಅಮೆರಿಕದ ನ್ಯೂಯಾರ್ಕ್‌ನಲ್ಲಿರುನ ‘ಸ್ಟೋನಿ ಬ್ರೂಕ್‌ ಯೂನಿವರ್ಸಿಟಿ’ಯ ‘ಸೆಂಟರ್‌ ಫಾರ್‌ ಇಂಡಿಯಾ ಸ್ಟಡೀಸ್‌’ ನಿರ್ದೇಶಕರಾಗಿರುವ ಪ್ರೊ. ಎಸ್‌.ಎನ್. ಶ್ರೀಧರ್ ಅವರ ಮಾತುಗಳನ್ನು ಗಮನಿಸಬೇಕಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಕನ್ನಡಕ್ಕೆ ಸಂಬಂಧಿಸಿದ ಅನೇಕ ಸಂಶೋಧನೆಗಳು ನಡೆಯುತ್ತಿವೆ. ಆದರೆ, ಈ ಸಂಶೋಧನೆಗಳ ವಿವರಗಳು ಮಾತ್ರ ಇಂದಿಗೂ ಸುಲಭಲಭ್ಯವಿಲ್ಲ.
ತಮ್ಮಲ್ಲಿ ನಡೆದಿರುವ ಸಂಶೋಧನೆಗಳ ಮಾಹಿತಿಯನ್ನು ತಂತಮ್ಮ ವೆಬ್‌ಸೈಟ್‌ಗಳಲ್ಲಿ ಪ್ರಕಟಪಡಿಸುವುದು ವಿಶ್ವವಿದ್ಯಾಲಯಗಳಿಗೆ ಕಷ್ಟದ ಸಂಗತಿಯಲ್ಲ. ಕನ್ನಡ ಲೇಖಕರ ವಿಳಾಸಗಳನ್ನು ಸಂಗ್ರಹಿಸಲು ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಸರ್ಕಾರಿ ಸಂಸ್ಥೆಗಳು ತಮ್ಮಲ್ಲಿನ ಮಾಹಿತಿಯನ್ನು ಅಂತರ್ಜಾಲದ ಮೂಲಕ ಆಸಕ್ತರಿಗೆ ತಲುಪಿಸುವ ಉತ್ಸಾಹ ತೋರಿಸುವುದಿಲ್ಲ. ಕನ್ನಡಕ್ಕೆ ಪ್ರಸ್ತುತ ಅಗತ್ಯವಿರುವುದು ಕನ್ನಡವನ್ನು ಪ್ರದರ್ಶನ ವಸ್ತುವಾಗಿಸುವ, ಕನ್ನಡಾಂಬೆಯನ್ನು ಮೆರವಣಿಗೆ ಮಾಡುವ ಯೋಜನೆಗಳಲ್ಲ. ಕನ್ನಡವನ್ನು ಒಳಗಿನಿಂದ ಸಶಕ್ತಗೊಳಿಸುವುದು ಇಂದಿನ ತುರ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....